‘ಸಿನಿಮಾ ನೋಡಿ ಹೊರ ಬಂದಾಗ ಚಿತ್ರ ಹೇಗಿದೆ ಎನ್ನುವುದನ್ನು ಕೇಳುವ ಬದಲು ಚಿತ್ರಕ್ಕೆ ಎಷ್ಟು ಸ್ಟಾರ್ ಕೊಡುತ್ತೀರಿ ಎನ್ನುವ ಪರಿಪಾಠ ಹೆಚ್ಚಾಗಿದೆ. ಕನಿಷ್ಠ ಮೂರು ಸ್ಟಾರ್ ಕೊಡಲೇಬೇಕು. ವಿಮರ್ಶೆ ಮಾಡುವುದನ್ನು ಅರಗಿಸಿಕೊಳ್ಳುವ ಮನಸ್ಥಿತಿಯೇ ಇಲ್ಲ’

ಕರ್ನಾಟಕ ಚಲನಚಿತ್ರ ಪತ್ರಕರ್ತರ ಸಂಘ ‘ಸಿನಿಮಾ ಮಾಧ್ಯಮ ಸ್ಥಿತಿ-ಗತಿ’ ವಿಷಯ ಕುರಿತಾದ ವಿಚಾರ ಸಂಕಿರಣ ಹಾಗೂ ಸದಸ್ಯರಿಗೆ ಗುರಿತನ ಚೀಟಿ ವಿತರಣಾ ಸಮಾರಂಭ ಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲಿ ನಟ ರಮೇಶ್‍ ಅರವಿಂದ್,‍ ಚಿತ್ರನಿರ್ದೇಶಕ ಪಿ ಶೇಷಾದ್ರಿ ಹಾಗೂ ಹಿರಿಪತ್ರಕರ್ತ-ಸಾಹಿತಿ ಜೋಗಿ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಕಾರ್ಯಕ್ರಮ ಉದ್ಘಾಟನೆ ನಂತರ ಮಾತನಾಡಿದ ನಟ ರಮೇಶ್‌ ಅರವಿಂದ್‌, ‘ಜೀವನದಲ್ಲಿ ಮುಂದೆ ಬರಬೇಕು ಎನ್ನುವ ಆಸೆ ಮತ್ತು ಗುರಿ ಇರುವವರು ಬದಲಾವಣೆಗೆ ಒಗ್ಗಿಕೊಳ್ಳುವ ಅಗತ್ಯವಿದೆ. ಮಾಡುವ ಕೆಲಸದಲ್ಲಿ ಬದಲಾವಣೆ ಇದ್ದಾಗ ಮಾತ್ರ ಫಲಿತಾಂಶದಲ್ಲೂ ಬದಲಾವಣೆ ಕಾಣಲು ಸಾಧ್ಯ. ಇತ್ತೀಚಿನ ದಿನಗಳಲ್ಲಿ ಒಟಿಟಿ ಮೂಲಕ ಚಿತ್ರಗಳು ಕೈಗೆಟಕುತ್ತಿವೆ. ಹೀಗಾಗಿ ಕೂತಲ್ಲೇ ಸಿನಿಮಾ ನೋಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಿರುವಾಗ ಪ್ರೇಕ್ಷಕನ ಸಮಯಕ್ಕೆ ಗೌರವ ಕೊಡುವ ಕೆಲಸ ಆಗಬೇಕು. ಆಗ ಮಾತ್ರ ಜನರನ್ನ ಚಿತ್ರಮಂದಿರದ ಕಡೆ ಕರೆತರಲು ಸಾಧ್ಯ’ ಎಂದು ಅಭಿಪ್ರಾಯಪಟ್ಟರು.

ಹಿರಿಯ ಚಿತ್ರನಿರ್ದೇಶಕ ಪಿ ಶೇಷಾದ್ರಿ ಮಾತನಾಡಿ, ‘ಕನ್ನಡ ಚಿತ್ರರಂಗಕ್ಕೆ 90 ವರ್ಷಗಳಾಗಿವೆ. ಈ ಒಂಬತ್ತು ದಶಕಗಳ ಅವಧಿಯಲ್ಲಿ ಬರೋಬ್ಬರಿ ಐದೂವರೆ ಸಾವಿರ ಚಿತ್ರಗಳು ತೆರೆಗೆ ಬಂದಿವೆ. ಚಿತ್ರರಂಗ ಸರಿ ಇಲ್ಲ, ನಷ್ಟ ಹೆಚ್ಚು ಎಂದಿದ್ದರೆ ಪ್ರತಿವರ್ಷವೂ ಸುಮಾರು 250ಕ್ಕೂ ಅಧಿಕ ಚಿತ್ರಗಳು ನಿರ್ಮಾಣವಾಗುತ್ತಿರಲಿಲ್ಲ. ಚಿತ್ರರಂಗದ ಸ್ಥಿತಿ ಚೆನ್ನಾಗಿಯೇ ಇದೆ. ಇದಕ್ಕೆ ಪೂರಕವಾಗಿ ಇದುವರೆಗೂ ನಾನು ನಿರ್ದೇಶಿಸಿದ ಚಿತ್ರಗಳ ಪೈಕಿ ಒಂದನ್ನು ಹೊರತುಪಡಿಸಿದರೆ, ಮಿಕ್ಕಂತೆ ಎಲ್ಲ ಚಿತ್ರಗಳು ನಿರ್ಮಾಪಕರಿಗೆ ಹಾಕಿದ ಬಂಡವಾಳವನ್ನು ತಂದುಕೊಟ್ಟಿವೆ’ ಎಂದರು.

‘ಸಾಮಾನ್ಯವಾಗಿ ನಾವು ಪರಭಾಷೆಯ ಚಿತ್ರಗಳು ಚೆನ್ನಾಗಿವೆ, ಅವರಂತೆ ನಾವು ಚಿತ್ರ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಮಾತಾಡುವುದನ್ನು ಕೇಳುತ್ತಿರುತ್ತೇವೆ. ಇತ್ತೀಚೆಗೆ ನನಗೆ ಮಲಯಾಳಂ, ಮರಾಠಿ ಸೇರಿದಂತೆ ವಿವಿಧ ಭಾಷೆಗಳ ಸಿನಿಮಾಗಳನ್ನು ಅದೇ ರಾಜ್ಯಗಳಿಗೆ ಹೋಗಿ, ಅಲ್ಲಿಯವರ ಜೊತೆಗೆ ನೋಡುವ ಅವಕಾಶ ಸಿಕ್ಕಿತ್ತು. ಆ ಸಮಯದಲ್ಲಿ ಅಲ್ಲಿನ ನಟ-ನಟಿಯರು, ತಂತ್ರಜ್ಞರ ಜೊತೆ ಮಾತನಾಡುವಾಗ, ಅವರು ನಮ್ಮ ಚಿತ್ರರಂಗಕ್ಕಿಂತ ನಿಮ್ಮ ಚಿತ್ರರಂಗ ಚಂದ ಎಂದು ಹೇಳುತ್ತಿದ್ದರು. ಇದನ್ನೆಲ್ಲ ಗಮನಿಸಿದರೆ ಪ್ರತಿ ಚಿತ್ರರಂಗಗಳಲ್ಲೂ ತನ್ನದೇ ಆದ ಸಮಸ್ಯೆಗಳಿವೆ ಮತ್ತು ಇದರ ನಡುವೆಯೇ ಚಿತ್ರಗಳು ನಿರ್ಮಾಣವಾಗುತ್ತಿವೆ’ ಎಂದು ಹೇಳಿದರು.

ಹಿರಿಯ ಪತ್ರಕರ್ತ ಮತ್ತು ಸಾಹಿತಿ ಜೋಗಿ ಮಾತನಾಡಿ, ‘ಡಿಜಿಟಲ್ ಯುಗದಲ್ಲಿ ಪತ್ರಿಕೆಗಳನ್ನು ನೋಡುವ ರೀತಿಯೇ ಬೇರೆಯಾಗಿದೆ. ಚಿತ್ರವೊಂದರ ಟೀಸರ್ ಬಿಡುಗಡೆಯಾದರೆ ಆ ಕ್ಷಣವೇ ಅದರ ಸುದ್ದಿ ಬರಬೇಕು. ಪತ್ರಿಕೆಯಲ್ಲಿ ಮರುದಿನ ಆ ಸುದ್ದಿ ಪ್ರಕಟವಾಗುವಷ್ಟರಲ್ಲಿ ಟೀಸರ್ ಲಕ್ಷ ಲಕ್ಷ ವೀಕ್ಷಣೆ ಕಂಡಿರುತ್ತದೆ. ಆ ಟೀಸರ್‍ ಹೇಗಿದೆ ಎನ್ನುವುದಕ್ಕಿಂತ, ಟೀಸರ್‍ ಎಷ್ಟು ವೀಕ್ಷಣೆ ಕಂಡಿದೆ ಎಂದು ಬರೆಯುವ ಒತ್ತಡವು ನಮ್ಮ ಮೇಲೆ ಇರುತ್ತದೆ ಇನ್ನು, ಸಿನಿಮಾ ನೋಡಿ ಹೊರ ಬಂದಾಗ ಚಿತ್ರ ಹೇಗಿದೆ ಎನ್ನುವುದನ್ನು ಕೇಳುವ ಬದಲು ಚಿತ್ರಕ್ಕೆ ಎಷ್ಟು ಸ್ಟಾರ್ ಕೊಡುತ್ತೀರಿ ಎಂದು ಕೇಳುವ ಪರಿಪಾಠ ಹೆಚ್ಚಾಗಿದೆ. ಕನಿಷ್ಠ ಮೂರು ಸ್ಟಾರ್ ಕೊಡಲೇಬೇಕು. ವಿಮರ್ಶೆ ಮಾಡುವುದನ್ನು ಅರಗಿಸಿಕೊಳ್ಳುವ ಮನಸ್ಥಿತಿಯೇ ಇಲ್ಲ. ಎಲ್ಲವೂ ಪರವಾಗಿಯೇ ಬರಬೇಕು ಎನ್ನುವ ಉದ್ದೇಶ ಚಿತ್ರ ತಂಡದ್ದು’ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಸಿನಿಮಾ ಪತ್ರಕರ್ತರಿಗೆ ಗುರುತಿನ ಚೀಟಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ಚಲನಚಿತ್ರ ಪತ್ರಕರ್ತರ ಸಂಘದ ಅಧ್ಯಕ್ಷ B N ಸುಬ್ರಹ್ಮಣ್ಯ ಸೇರಿದಂತೆ ಪದಾಧಿಕಾರಿಗಳು ಹಾಜರಿದ್ದರು.

LEAVE A REPLY

Connect with

Please enter your comment!
Please enter your name here