ಹರಿಪ್ರಸಾದ್ ಜಯಣ್ಣ ನಿರ್ದೇಶನಲ್ಲಿ ತಯಾರಾಗುತ್ತಿರುವ ‘ಪದವಿಪೂರ್ವ’ ಚಿತ್ರತಂಡಕ್ಕೆ ನಟಿ ದಿವ್ಯಾ ಉರುಡುಗ ಸೇರ್ಪಡೆಯಾಗಿದ್ದಾರೆ. ಚಿತ್ರದ ಪ್ರಮುಖ ಪಾತ್ರವೊಂದರಲ್ಲಿ ಅವರು ನಟಿಸಲಿದ್ದು, ಸದ್ಯದಲ್ಲೇ ಸಿನಿಮಾದಲ್ಲಿನ ಅವರ ಸನ್ನಿವೇಶಗಳ ಚಿತ್ರೀಕರಣ ಆರಂಭವಾಗಲಿದೆ.

ಕಿರುತೆರೆ ನಟಿ ದಿವ್ಯಾ ಉರುಡುಗ ‘ಪದವಿಪೂರ್ವ’ ಚಿತ್ರತಂಡಕ್ಕೆ ಸೇರ್ಪಡೆಯಾಗಿದ್ದಾರೆ. ‘ಬಿಗ್‌ಬಾಸ್‌’ ಶೋ ಸ್ಪರ್ಧಿಯಾಗಿ ಕಿರುತೆರೆ ವೀಕ್ಷಕರಿಗೆ ಪರಿಚಿತರಾಗಿದ್ದ ನಟಿ ಈ ಚಿತ್ರದಲ್ಲಿ ವಿಶೇಷ ಪಾತ್ರವೊಂದನ್ನು ನಿರ್ವಹಿಸಲಿದ್ದಾರಂತೆ. ಯೋಗರಾಜ್ ಸಿನಿಮಾಸ್ ಹಾಗೂ ರವಿ ಶಾಮನೂರ್ ಫಿಲಂಸ್‌ ಜಂಟಿಯಾಗಿ ನಿರ್ಮಿಸುತ್ತಿರುವ ಚಿತ್ರವಿದು. “ಭಟ್ಟರ ಸಿನಿಮಾದಲ್ಲಿ ಅವಕಾಶ ಪಡೆಯುವುದು ಎಂದಿಗೂ ಖುಷಿಯ ವಿಷಯ. ಚಿತ್ರದಲ್ಲಿನ ನನ್ನ ವಿಶೇಷ ಪಾತ್ರಕ್ಕೆ ಸ್ಕೋಪ್‌ ಇದೆ. ಪಾತ್ರನಿರ್ವಹಣೆಗೆ ಸಂಬಂಧಿಸಿದಂತೆ ಅವರ ನಿರೀಕ್ಷೆಯನ್ನು ಹುಸಿಗೊಳಿಸುವುದಿಲ್ಲ ಎನ್ನುವ ವಿಶ್ವಾಸವಿದೆ” ಎನ್ನುತ್ತಾರೆ ನಟಿ ದಿವ್ಯಾ. ಅವರು ನಟಿಸಲಿರುವ ಭಾಗದ ಚಿತ್ರೀಕರಣವು ಬೆಂಗಳೂರು ಹಾಗು ಮಂಗಳೂರಿನ ಸುತ್ತಮುತ್ತ ಶೀಘ್ರದಲ್ಲೇ ಶುರುವಾಗಲಿದೆ. ಇದು ಚಿತ್ರದ ಐದನೇ ಹಂತದ ಚಿತ್ರೀಕರಣ.

ಚಿತ್ರದ ನಾಲ್ಕನೇ ಹಂತದ ಚಿತ್ರೀಕರಣವು ಕಳೆದ ತಿಂಗಳಷ್ಟೇ ಪೂರ್ಣಗೊಂಡಿದೆ. ಬೆಂಗಳೂರಿನ ವಿವಿಧ ಭಾಗಗಳಲ್ಲಿ ನಡೆಸಿದ ಚಿತ್ರೀಕರಣದ ದೃಶ್ಯಗಳು ಸೊಗಸಾಗಿ ಮೂಡಿಬಂದಿದೆ ಎಂದು ಚಿತ್ರದ ನಿರ್ದೇಶಕ ಹರಿಪ್ರಸಾದ್ ಜಯಣ್ಣ ಸಂತೋಷ ವ್ಯಕ್ತಪಡಿಸಿದ್ದಾರೆ. ಹೊಸಬರ ದಂಡೇ ಇರುವ ಈ ಚಿತ್ರಕ್ಕೆ ಯುವ ಪ್ರತಿಭೆ ಪೃಥ್ವಿ ಶಾಮನೂರು ನಾಯಕನಾದರೆ, ಅಂಜಲಿ ಅನೀಶ್ ಮತ್ತು ಯಶ ಶಿವಕುಮಾರ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಪದವಿಪೂರ್ವ ಚಿತ್ರಕ್ಕಾಗಿ ಅರ್ಜುನ್ ಜನ್ಯ ಸಂಯೋಜಿಸಿರುವ ರಾಗಗಳಿಗೆ ಯೋಗರಾಜ್ ಭಟ್ ಸಾಹಿತ್ಯ ರಚಿಸಿದ್ದಾರೆ. ಸಂತೋಷ್ ರೈ ಪಾತಾಜೆ ಛಾಯಾಗ್ರಹಣ, ಮಧು ತುಂಬಕೆರೆ ಸಂಕಲನ ಚಿತ್ರಕ್ಕಿದೆ.

LEAVE A REPLY

Connect with

Please enter your comment!
Please enter your name here